ಚೆಕ್ ಡ್ಯಾಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸುನೀಲ್ ಸುಬ್ರಮಣಿ ಸೂಚನೆ

ಮಡಿಕೇರಿ: ಶಾಶ್ವತ ಕುಡಿಯುವ ನೀರು ಪೂರೈಸುವ ಕುಂಡಾಮೇಸ್ತ್ರಿ ಯೋಜನೆಯ ಚೆಕ್ ಡ್ಯಾಂ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಪರಿಶೀಲಿಸಿದರು. ಮಡಿಕೇರಿ ತಾಲ್ಲೂಕಿನ ಕುಂಡಾಮೇಸ್ತ್ರಿ ಸ್ಥಳಕ್ಕೆ ಭೇಟಿ ನೀಡಿ, ವೀಕ್ಷಣೆ ಮಾಡಿದ ವಿಧಾನ ಪರಿಷತ್ ಸದಸ್ಯರು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು. 

ಕುಂಡಾಮೇಸ್ತ್ರಿ ಯೋಜನೆಯನ್ನು ಬಹಳ ನಿರೀಕ್ಷೆಯಿಟ್ಟು ಅನುಷ್ಠಾನಗೊಳಿಸಲಾಗುತ್ತಿದೆ. ಕುಂಡಾಮೇಸ್ತ್ರಿ ಯೋಜನೆಯಿಂದ ವರ್ಷ ಪೂರ್ತಿ ನೀರು ದೊರೆಯುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಶಾಸಕರು ಹೇಳಿದರು.

ಈಗಾಗಲೇ ಚೆಕ್‌ಡ್ಯಾಂ ನಿರ್ಮಾಣ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಪ್ರಥಮ ಆದ್ಯತೆ ಮತ್ತು ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದವರು ಹೇಳಿದರು. 

ಕುಂಡಾಮೇಸ್ತ್ರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಚರ್ಚಿಸಲಾಗುವುದು, ಎಲ್ಲರ ಸಹಕಾರ ಪಡೆದು ಯೋಜನಾ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಸುನೀಲ್ ಸುಬ್ರಮಣಿ ಹೇಳಿದರು.

ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಪ್ರಸನ್ನ ಅವರು ಕುಂಡಾಮೇಸ್ತ್ರಿ ಕುಡಿಯುವ ನೀರು ಯೋಜನೆಗೆ ೩೦ ಕೋಟಿ ರೂ. ಅಂದಾಜು ಮಾಡಲಾಗಿದೆ. ಇದುವರೆಗೆ ೨೧ ಕೋಟಿ ರೂ. ಬಿಡುಗಡೆಯಾಗಿದ್ದು, ೫.೪೭ ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲಾಗುತ್ತಿದೆ. ೨೦೧೬ ರಿಂದಲೇ ಕುಂಡಾಮೇಸ್ತ್ರಿಯಿಂದ ಕುಡಿಯುವ ನೀರನ್ನು ಕೂಟುಹೊಳೆಗೆ ಪೂರೈಕೆ ಮಾಡಲಾಗುತ್ತಿದೆ. ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಸರಬರಾಜಾಗುತ್ತಿದೆ ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ಎಂ.ಎಲ್.ರಮೇಶ್, ಪ್ರಮುಖರಾದ ಪಿ.ಡಿ.ಪೊನ್ನಪ್ಪ, ಟಿ.ಎಸ್.ಪ್ರಕಾಶ್, ಕೆ.ಎಸ್.ರಮೇಶ್, ಶಿವಕುಮಾರಿ, ಅನಿತಾ ಪೂವಯ್ಯ, ಸವಿತಾ ರಾಕೇಶ್, ಮಹೇಶ್ ಜೈನಿ, ಅರುಣ್ ಕುಮಾರ್ ಮತ್ತಿರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!