ಶಾಸಕ ಎಚ್.ನಾಗೇಶ್ ರಾಜೀನಾಮೆ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಕಳೆದ ಜೂನ್‌ನಲ್ಲಿ ಸೇರ್ಪಡೆಗೊಂಡಿದ್ದ ಪಕ್ಷೇತರ ಶಾಸಕ ಎಚ್.ನಾಗೇಶ್ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದರು. 

ಈ ರಾಜೀನಾಮೆಯಿಂದ ಕುಮಾರಸ್ವಾಮಿ ಸರ್ಕಾರ ಬಹುಮತ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ. ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ರಮೇಶ್‌ ಕುಮಾರ್ ಅಂಗೀಕರಿಸಿದರೆ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ.

‘ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆಯುತ್ತಿದ್ದೇನೆ. ತಾವು ಸೂಕ್ತ ಕ್ರಮ ಜರುಗಿಸಬೇಕು’ ಎಂದು ನಾಗೇಶ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ ನಂತರ ವಿಶೇಷ ವಿಮಾನದಲ್ಲಿ ನಾಗೇಶ್ ಮುಂಬೈಗೆ ತೆರಳಿದರು. 

ಬಿಜೆಪಿ ಪಾಳಯದಲ್ಲಿ ಸಂಭ್ರಮ: ನಾಗೇಶ್ ರಾಜೀನಾಮೆ ಹಿನ್ನೆಲೆಯಲ್ಲಿ ಮ್ಯಾಜಿಕ್ ನಂಬರ್ ತಲುಪಿದ ‌ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಯಡಿಯೂರಪ್ಪ ‌ನಿವಾಸದಲ್ಲಿ‌ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಯಡಿಯೂರಪ್ಪ ‌ನಿವಾಸಕ್ಕೆ‌ ಪಕ್ಷದ ಶಾಸಕರು ಮತ್ತು ಮುಖಂಡರು ಹಿಂಡುಹಿಂಡಾಗಿ ಆಗಮಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!