ಸರಕಾರ ರಚನೆ : ಬಿಜೆಪಿ ಹೈಕಮಾಂಡ್ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ

ನವದೆಹಲಿ: ಮೈತ್ರಿ ಸರ್ಕಾರದ ಪತನದ ಬಳಿಕ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇರುವ ಬಿಜೆಪಿ ಪಕ್ಷದ ನಾಯಕರಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ದು, ಸರ್ಕಾರ ರಚನೆಗೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ.
ರಾಜ್ಯ ನಾಯಕರದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ವಿಜಯೇಂದ್ರ ಮತ್ತು ಮಾಧುಸ್ವಾಮಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಅವಧಿಗಳ ಕಾಲ ಸಭೆ ನಡೆಸಲಾಗಿದೆ. ಸಭೆಯ ಬಳಿಕ ಹೈಕಮಾಂಡ್ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ನಾಳೆ ಸಂಸತ್ತಿನ ಅಧಿವೇಶನ ಪೂರ್ಣಗೊಳ್ಳಲಿರುವ ಕಾರಣ ಹಲವು ಮಸೂದೆಗಳು ಮಂಡನೆಯಾಗಬೇಕಿದೆ. ಹೀಗಾಗಿ ಸಂಜೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಶಾ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪನವರು ಈಗ ಸರ್ಕಾರ ರಚನೆಗೆ ಮುಂದಾದರೆ ಬಹುಮತ ಸಾಬೀತು ಪಡಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಂಶಗಳನ್ನು ರಾಜ್ಯ ನಾಯಕರು ಹೈಕಮಾಂಡ್‍ಗೆ ವಿವರಿಸಿದ್ದಾರೆ. ರಾಜ್ಯ ನಾಯಕರ ಮಾಹಿತಿ ಪಡೆದಿರುವ ಹೈಕಮಾಂಡ್ ರಾಜ್ಯದಿಂದ ತಮ್ಮದೇ ವರದಿಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಅಮಿತ್ ಶಾ ಭೇಟಿಯ ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ರಾಜ್ಯದ ರಾಜಕೀಯ ಬೆಳೆವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ನಾಯಕರು ನಮ್ಮ ಮಾಹಿತಿಯನ್ನು ಪಡೆದಿದ್ದಾರೆ. ಮಧ್ಯಾಹ್ನದ ಬಳಿಕ ಮತ್ತೊಂದು ಸುತ್ತಿನ ಚರ್ಚೆಗೆ ಕರೆದಿದ್ದಾರೆ. ಸಭೆಯಲ್ಲಿ ಜೆಪಿ ನಡ್ಡಾ ಅವರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಸಭೆಗೂ ಮುನ್ನ ಮಾತನಾಡಿದ್ದ ಶಾಸಕ ಮಾಧುಸ್ವಾಮಿ ಅವರು, ಮೈತ್ರಿ ಸರ್ಕಾರ ವಿಶ್ವಾಸ ಕಳೆದುಕೊಂಡು ಪತನವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕಿದೆ. ಈ ಕಾರಣದಿಂದ ಹೈಕಮಾಂಡ್ ಭೇಟಿಗೆ ಬಂದಿದ್ದು, ಅಮಿತ್ ಶಾ ಅವರಿಗೆ ರಾಜ್ಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಶಾಸಕರ ರಾಜೀನಾಮೆ ಸಂಬಂಧ ಗೊಂದಲಗಳಿದ್ದು, ಸ್ಪೀಕರ್ ಅವರು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಈ ಬಗ್ಗೆ ಹೈಕಮಾಂಡ್ ಅವರಿಗೂ ಗೊಂದಲಗಳಿವೆ. ಪರಿಣಾಮ ಚರ್ಚೆ ನಡೆಸಿ ಮಾಹಿತಿ ನೀಡುತ್ತೇವೆ. ಬಿಎಸ್ಪಿ ಶಾಸಕ ಮಹೇಶ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪರಿಣಾಮ ಬಿಜೆಪಿ ಸರ್ಕಾರ ರಚನೆಗೆ ಅನುಕೂಲ ಆಗಲಿದೆ ಎಂದು ವಿವರಿಸುವುದಾಗಿ ತಿಳಿಸಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಅನ್ಯ ಪಕ್ಷದ ಶಾಸಕರನ್ನು ಸೆಳೆದು ಅಥವಾ ಜೆಡಿಎಸ್ ಬೆಂಬಲ ಪಡೆದು ಸಿಎಂ ಆಗಬಹುದು ಎಂಬ ವಿಶ್ವಾಸದಲ್ಲಿದ್ದ ಯಡಿಯೂರಪ್ಪ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಆದರೆ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ನಿಂತು ಮೈತ್ರಿ ಸರ್ಕಾರ ರಚಿಸುವ ತಯಾರಿ ನಡೆಸಿದರು. ಇದರಿಂದಾಗಿ ಬಹುಮತ ಸಾಬೀತುಪಡಿಸಲು ಅಸಾಧ್ಯವೆಂದರಿತ ಯಡಿಯೂರಪ್ಪ, ವಿದಾಯ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಡೆದಿದ್ದರು. ಇದರಿಂದ ಇಡೀ ದೇಶದಲ್ಲಿ ಬಿಜೆಪಿಗೆ ಮುಖಭಂಗವಾಗಿತ್ತು.
ಈ ಕಾರಣಕ್ಕೆ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲು ಹೈಕಮಾಂಡ್ ಮುಂದಾಗುತ್ತಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!