ಪೋಕ್ಸೋ ಪ್ರಕರಣದಲ್ಲಿ ಬಂಧಿತ ಮುರುಘಾಶ್ರೀಗೆ ಸೆ.14ವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ ಸೆ.5: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳಿಗೆ 9 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸ್ವಾಮೀಜಿಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ ಎರಡನೇ ಅಪರ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲ ಅವರು ಆದೇಶ ನೀಡಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಇನ್ವೆಸ್ಟಿಗೇಷನ್ ಎಲ್ಲಾ ಮುಗಿಯಿತಾ ಎಂದು ನ್ಯಾಯಾಧೀಶರು ತನಿಖಾಧಿಕಾರಿಯನ್ನು ಪ್ರಶ್ನಿಸಿದರು. ಪೊಲೀಸ್ ಅಧಿಕಾರಿಗಳು ಮತ್ತೆ ಸ್ವಾಮೀಜಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳದ ಹಿನ್ನೆಲೆ ನ್ಯಾ.ಕೋಮಲಾ ಅವರು ಸ್ವಾಮೀಜಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಇನ್ನು ಕೆಲವೇ ಹೊತ್ತಿನಲ್ಲಿ ಮುರುಘಾ ಶ್ರೀಗಳು ಜೈಲಿಗೆ ಸ್ಥಳಾಂತರ ಮಾಡಲಿದ್ದು, ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಜೈಲು ಮುಂಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಸ್ಥಳೀಯ ಪೊಲೀಸರು ಸೇರಿದಂತೆ ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಸೆ.7 ಕ್ಕೆ ಮುಂದೂಡಲಾಗಿದೆ. ಇದರ ಜೊತೆಗೆ ಪ್ರಕರಣದ 2ನೇ ಆರೋಪಿ ರಶ್ಮಿಯನ್ನ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದು, ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಕೋರ್ಟ್ ಆದೇಶ ನೀಡಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!