ರಾಜಸ್ಥಾನ ಸಿಎಂ ಹುದ್ದೆಗೆ ಅಶೋಕ್ ಗೆಹ್ಲೋಟ್ ರಾಜಿನಾಮೆ ಸಾಧ್ಯತೆ?

ಹೊಸದಿಲ್ಲಿ ಸೆ.23: ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗುವ ಸಲುವಾಗಿ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಪಕ್ಷದ ಅಧ್ಯಕ್ಷರಾದರೂ ಸಿಎಂ ಆಗಿ ಮುಂದುವರಿಯುವುದಾಗಿ ಬುಧವಾರ ಗೆಹ್ಲೋಟ್ ಹೇಳಿಕೆ ನೀಡಿದ್ದರು. ಆದರೆ ಹೊಸ ಅಧ್ಯಕ್ಷರು ಕೂಡಾ “ಒಬ್ಬ ವ್ಯಕ್ತಿ ಒಂದು ಹುದ್ದೆ” ತತ್ವಕ್ಕೆ ಬದ್ಧರಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಘೋಷಿಸಿದ ಬೆನ್ನಲ್ಲೇ ತಮ್ಮ ನಿಲುವು ಬದಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಗಾಂಧಿ ಕುಟುಂಬದ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ ಹಾಲಿ ಹೊಂದಿರುವ ಸಿಎಂ ಹುದ್ದೆ ತ್ಯಜಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂಧನ ಮಿಸ್ತ್ರಿಯವರು ಗುರುವಾರ ಚುನಾವಣಾ ಪ್ರಕ್ರಿಯೆಯ ಅಧಿಸೂಚನೆ ಹೊರಡಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪಕ್ಷದ ಮುಖ್ಯಸ್ಥರ ಅಭ್ಯರ್ಥಿ ಎಂದು ಬಿಂಬಿಸಲ್ಪಟ್ಟಿರುವ ಗೆಹ್ಲೋಟ್ ಅವರು ಕೇರಳ ಸಂಸದ ಶಶಿ ತರೂರ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಅದರಂತೆ 22 ವರ್ಷಗಳ ಬಳಿಕ ಪಕ್ಷಾಧ್ಯಕ್ಷ ಹುದ್ದೆಗೆ ಸ್ಪರ್ಧೆ ನಡೆಯುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!