ಪೂನಾದಿಂದ ಉಡುಪಿಗೆ ಬರುತ್ತಿದ್ದ ಬಸ್ಸಿನಲ್ಲಿ ಬೆಂಕಿ-30 ಪ್ರಯಾಣಿಕರು ಪಾರು
ಕಾರವಾರ: ಪೂನಾದಿಂದ ಉಡುಪಿಗೆ ಹೊರಟಿದ್ದ ಖಾಸಗಿ ಬಸ್ಸಿನ ಹಿಂದಿನ ಚಕ್ರ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕಾರವಾರ ರಸ್ತೆಯ ಟೋಲ್ ಗೇಟ್ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ಉಡುಪಿಯ ರೇಷ್ಮಾ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ಶನಿವಾರ ಪೂನಾದಿಂದ ಉಡುಪಿಯತ್ತ ಹೊರಟಿದ್ದಾಗ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಗರದ ಹೊರವಲಯದ ಬೈಪಾಸ್ ರಸ್ತೆಯ ಕಾರವಾರ ರಸ್ತೆ ಟೋಲ್ ಗೇಟ್ ಬಳಿ ಬಸ್ಸಿನ ಹಿಂದಿನ ಚಕ್ರ ಸ್ಪೋಟಗೊಂಡು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕನು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ.