ಪುತ್ತೂರು: ಎ.17 ರಂದು ಪ‌ಕ್ಷೇತರ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ

ಪುತ್ತೂರು: ಬಿಜೆಪಿಯಿಂದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ವಂಚನೆಯಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಿಜೆಪಿಯ ಬಂಡಾಯವಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಎ.17ರಂದು ಅವರು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮೊದಲು ದರ್ಬೆಯಿಂದ ತಾಲೂಕು ಆಡಳಿತ ಸೌಧದ ತನಕ ಬೃಹತ್ ಮೆರವಣಿಗೆಯಲ್ಲಿ ತೆರಳಿ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿ ಬಳಗದಿಂದ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ಅಭಿಯಾನ ನಡೆದಿತ್ತು. ‘ಈ ಬಾರಿ ಪುತ್ತೂರಿಗೆ ಪುತ್ತಿಲ’ ಎಂಬ ಈ ಅಭಿಯಾನ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರವನ್ನು ಪಡೆದಿತ್ತು. ಆದರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪಕ್ಷ ಟಿಕೆಟ್ ನೀಡದೆ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಿದ ಬಳಿಕ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಬುಧವಾರ ಪುತ್ತೂರಿನ ಕೊಟೇಚಾ ಹಾಲ್‌ನಲ್ಲಿ ಪುತ್ತಿಲ ಅಭಿಮಾನಿಗಳ ಸಭೆ ನಡೆಸಲಾಗಿತ್ತು. ಸಾವಿರಾರು ಮಂದಿ ಸಭೆಯಲ್ಲಿ ಭಾಗವಹಿಸಿದ್ದು, ಪುತ್ತಿಲ ಅವರು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದರು. ಮುಂದಿನ 2 ದಿನಗಳ ಬಳಿಕ ತನ್ನ ನಿಲುವು ತಿಳಿಸುವುದಾಗಿ ಪುತ್ತಿಲ ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!