ಮಂಗಳೂರು: ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಬಂಧನ
ಮಂಗಳೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಯಾನೆ ಮೂರ್ತಿ (52) ಬಂಧಿತ ಆರೋಪಿ. ಬಂಧಿತನಿಂದ ಕಳವು ಮಾಡಿದ ಸುಮಾರು ರೂ 15,00,000 ಮೌಲ್ಯದ 20 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಹೀರೋ ಹೋಂಡಾ ಸ್ನೇಂಡರ್ ಪ್ಲಸ್ ಮೋಟಾರ್ ಸೈಕಲ್ ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನದ ಮತ್ತು ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದಾನೆ.