ಸೌಹಾರ್ದತೆಗೆ ಸಾಕ್ಷಿಯಾಗಿದ್ದ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ ಇನ್ನಿಲ್ಲ
ಕಾಪು: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದಾಗಿ ನಿಧನ ಹೊಂದಿದರು.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಸೋಮವಾರ ಮುಂಜಾನೆ ನಾಗಸ್ವರದೊಂದಿಗೆ ಮನೆಯಿಂದ ಹೊರಟ್ಟಿದ್ದರು. ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಹೃದಯಾಘಾತಕ್ಕೊಳಗಾ ಗಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಇಹಲೋಕ ತ್ಯಜಿಸಿದ್ದರು.
ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು 3ನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.
ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.