ಪರ್ಯಾಯ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ

ಉಡುಪಿ, ಡಿ.1: ಮುಂದಿನ ಜನವರಿ ತಿಂಗಳಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

2024ರ ಜನವರಿ 8ರಿಂದ 18ರವರೆಗೆ ಈ ಬಾರಿ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮವು ನಡೆಯ ಲಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು, ಅಭಿಮಾನಿಗಳು ಆಗಮಿಸಲಿದ್ದು, ಜನಸಂದಣಿ ನಗರದಲ್ಲಿ ಹೆಚ್ಚಲಿದೆ. ಹೀಗಾಗಿ ನಗರದ ಸ್ವಚ್ಛತೆ, ನೈರ್ಮಲ್ಯ, ರಸ್ತೆಗಳ ಸುಸ್ಥಿತಿ, ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿ ಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮೊಬೈಲ್ ಶೌಚಾಲಯಗಳನ್ನು ಅಲ್ಲಲ್ಲಿ ನಿರ್ಮಿಸಬೇಕು ಎಂದ ಅವರು, ನಗರದಲ್ಲಿ ಶುಚಿತ್ವಕ್ಕೆ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಬೇಕೆಂದರು.

ಪೊಲೀಸ್ ಇಲಾಖೆಯವರು ಬಂದೋಬಸ್ತ್‌ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು. ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಕೃಷ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳ ಗೊಂಡ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕ ವಾಗಿ ತೆರೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೆಎಸ್ಸಾರ್ಟಿಸಿ ವಿಶೇಷ ವಾಹನಗಳ ಸೌಲಭ್ಯವನ್ನು ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಗತ್ಯ ವಿರುವ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ಸೂಚನೆ ನೀಡಿದ ಅವರು, ಪ್ರತಿಯೊಂದು ವ್ಯವಸ್ಥೆಯ ಮೇಲುಸ್ತುವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚಿಸಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಜನವರಿ 8ರಿಂದ 18ರವರೆಗೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ನಗರಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಕಾರ್ಯಕ್ರಮದ ಯಶಸ್ಸಿಗೆ ಸ್ಥಳೀಯ ನಗರಾಡಳಿತ ಹಾಗೂ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದರೊಂದಿಗೆ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ಪಕ್ಕದ ಜಿಲ್ಲೆಯಿಂದ ತರಿಸಿಕೊಳ್ಳಬೇಕು ಎಂದ ಅವರು, ಮೆರವಣಿಗೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಪ್ರಚಾರ ಪಡಿಸುವ ಟ್ಯಾಬ್ಲೋಗಳು ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿವೈಎಸ್‌ಪಿ ದಿನಕರ್, ನಗರಾಭಿವೃದ್ಧಿ ಕೋಶದ ಅಭಿಯಂತರ ಮೋಹನ್ ರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು, ಮಠದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!