ಅಕ್ರಮ ಗಣಿಗಾರಿಕೆ: 87. 51 ಕೋಟಿ ರೂ. ದಂಡ ವಸೂಲಿ- ಸಚಿವ ಚಲುವರಾಯಸ್ವಾಮಿ
![](https://udupitimes.com/wp-content/uploads/2023/12/chaluva.jpg)
ಬೆಳಗಾವಿ:ರಾಜ್ಯ ವ್ಯಾಪಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಗಣಿ ಮಾಲೀಕರ ವಿರುದ್ದ 87.51 ಕೋಟಿ ದಂಡ ವಸೂಲಿ ಮಾಡಲಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿಯೇ 42,53,50,000 ರೂ.ದಂಡ ಹಾಗೂ211ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಸಚಿವ ಸಂಪುಟ ಉಪಸಮಿತಿಯಲ್ಲೂ ಇದರ ಬಗ್ಗೆ ವ್ಯಾಪಕವಾಗಿ ಚರ್ಚಿಸಿ ಎಲ್ಲೆಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗಣಿಗಾರಿಕೆ ನಡೆಸಿದ್ದಾರೋ ಅಂತಹ ಕಡೆ ಇನ್ನಷ್ಟು ದಂಡ ಹಾಕಬೇಕೆಂಬ ಚರ್ಚೆ ಇದೆ ಎಂದು ಹೇಳಿದರು.
ರಾಜ್ಯದ ಎಲ್ಲ್ಲ ಕಡೆ ಡ್ರೋನ್ ಮೂಲಕ ಸರ್ವೆ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದು, ಇದರಲ್ಲಿ ಯಾವುದೇ ಕಾರಣಕ್ಕೂ ಸರಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.