ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ

ಉಡುಪಿ, ಡಿ.12: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಹಾಗೂ ಮುಸ್ಲಿಮ್ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಇಂದು ಬೆಳಗಾವಿಯಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಭೀಕರ ಹತ್ಯಾಕಾಂಡವು ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಉಡುಪಿಯ ಪೊಲೀಸ್ ಇಲಾಖೆ ಮುತುವರ್ಜಿ ವಹಿಸಿ ತ್ವರಿತಗತಿಯಲ್ಲಿ ರಹಸ್ಯವನ್ನು ಬೇಧಿಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕ ಹೀನ ಅಪರಾಧ ವಾಗಿದ್ದು, ಜಿಲ್ಲೆಯ ಜನರಲ್ಲಿ ಅಭದ್ರತೆಯ ಭಾವನೆ ಮೂಡಿಸಿದೆ. ಈ ಕ್ರೂರ ಅಪರಾಧ ಪ್ರಕರಣಕ್ಕೆ ರಾಜ್ಯದ ಘನ ಸರಕಾರವು ನ್ಯಾಯಪೂರ್ಣ ತಾರ್ಕಿಕ ಅಂತ್ಯವನ್ನು ಅತ್ಯಂತ ಶೀಘ್ರಗತಿಯಲ್ಲಿ ಕಲ್ಪಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವುದು ಅತ್ಯಂತ ಅಗತ್ಯದ ಕರ್ತವ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯ ವನ್ನು ಸ್ಥಾಪಿಸಬೇಕು. ಈ ಪ್ರಕರಣದಲ್ಲಿ ಆರೋಪಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾದ ಅಥವಾ ಸಹಕರಿಸಿರಬಹುದಾದ ಇತರರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಭೀಭತ್ಸ ಕೃತ್ಯಗಳು ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಉಡುಪಿ ಜಿಲ್ಲೆಯ ಆಯಕಟ್ಟಿನ ಜಾಗದಲ್ಲಿ ಅಳವಡಿಸಬೇಕು ಎಂದು ನಿಯೋಗ ಮುಖ್ಯಮಂತ್ರಿಯನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿಗೆ ಸರಕಾತ್ಮಕವಾಗಿ ಸ್ಪಂದಿಸಿ, ಕ್ರಮದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಡುಪಿ ತಾಲೂಕು ಅಧ್ಯಕ್ಷ ಮುಹಮ್ಮದ್ ಇರ್ಷಾದ್, ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಂತ್ರಸ್ತ ಕುಟುಂಬದ ಯಜಮಾನ ನೂರ್ ಮುಹಮ್ಮದ್, ಸಂಬಂಧಿ ಅಶ್ರಫ್ ಕೆ., ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್, ಸೆಂಟ್ರಲ್ ಮುಸ್ಲಿಮ್ ಕಮಿಟಿ ದ.ಕ. ಜಿಲ್ಲಾ ಕಾರ್ಯದರ್ಶಿ ಶಂಶುದ್ದೀನ್ ಸುಳ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಜಿ.ಎ.ಬಾವ, ಎಂ.ಎ.ಗಫೂರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!