ನಾನು ಕೇಸರಿ ಶಾಲು ಹಾಕುವುದಿಲ್ಲ- ಕುಮಾರ ಸ್ವಾಮಿ ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ

ನವದೆಹಲಿ: ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಶುಕ್ರವಾರ ಖಂಡಿಸಿದ್ದಾರೆ.

ಇಂದು ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.

ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿರುವ ದೇವೇಗೌಡ, ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Leave a Reply

Your email address will not be published. Required fields are marked *

error: Content is protected !!