‘ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ’: ವಿಧೇಯಕ ಮಂಡನೆಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲೂ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು, ಈ ಸಂಬಂಧ ಮುಂದಿನ ಅಧಿವೇಶನದಲ್ಲಿ ಕರ್ನಾಟಕ ಸಹಕಾರ ಸಂಘಗಳು(ತಿದ್ದುಪಡಿ) ವಿಧೇಯಕ-2024 ಅನ್ನು ಮಂಡಿಸಲು ನಿರ್ಧರಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಪ್ರಾಥಮಿಕ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ಕಲ್ಪಿಸಿರುವಂತೆ ಮಾಧ್ಯಮಿಕ, ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿಯೂ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯವನ್ನು ಒದಗಿಸುವ ಸದುದ್ದೇಶದಿಂದ ಈ ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಮಾರು 25 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳಲ್ಲಿ ಈ ಮೀಸಲಾತಿಯ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಬಿತ್ತನೆ ಬೀಜವು ಅಂತರ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ವಹಿವಾಟಿಗೆ ಸಂಬಂಧಿಸಿರುವುದರಿಂದ ರಾಜ್ಯಗಳಲ್ಲಿ ಪ್ರತ್ಯೇಕವಾದ ವಿಧೇಯಕಗಳನ್ನು ತರುವುದು ಸೂಕ್ತವಲ್ಲವೆಂದು ತಿಳಿಸಿದೆ. ಅಲ್ಲದೆ, ಕೇಂದ್ರ ಸರಕಾರದ ವಿಧೇಯಕ ರಾಷ್ಟ್ರಪತಿ ಬಳಿ ಅನುಮೋದನೆಗೆ ಬಾಕಿಯಿರುವುದ ರಿಂದ ಕರ್ನಾಟಕ ಕುಲಾಂತರಿ ಮತ್ತು ತಳಿ ವಿಜ್ಞಾನದ ಪ್ರಕಾರ ಮಾರ್ಪಾಡಾದ ಹತ್ತಿ ಬೀಜಗಳ(ಮಾರಾಟ ಬೆಲೆಯ ನಿಗದಿ ಮತ್ತು ಪರಿಹಾರದ ಸಂದಾಯ) ವಿಧೇಯಕ-2015 ಅನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದರು.

ಭಾರತ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನಗಳು ಹಾಗೂ ಇತರೆ ಕರಕುಶಲ ಉತ್ಪನ್ನಗಳನ್ನು ಉತ್ತೇಜಿಸಲು ಕೇಂದ್ರ ಸರಕಾರದ 193 ಕೋಟಿ ರೂ.ಗಳ ಬಡ್ಡಿ ರಹಿತ ಸಾಲದ ನೆರವಿನೊಂದಿಗೆ ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ದೊಡ್ಡಕೆರೆ ಮೈದಾನದಲ್ಲಿರುವ ಕಸಬ ಸರ್ವೆ ನಂ.1 ರಲ್ಲಿರುವ ಪೈಕಿ 80 ಎಕರೆ ಜಮೀನಿನಲ್ಲಿ 6.5 ಎಕರೆ ಜಮೀನನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ಹಸ್ತಾಂತರಿಸಿ ‘ಯೂನಿಟಿ ಮಾಲ್’ ನಿರ್ಮಾಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಕೆ.ಎ.ಎಸ್(ಸೂಪರ್ ಟೈಂ ಸ್ಕೇಲ್) ಮತ್ತು ಕೆ.ಎ.ಎಸ್ (ಆಯ್ಕೆ ಶ್ರೇಣಿ) ಮುಂಭಡ್ತಿಗೆ ನಿಗದಿಪಡಿಸಿರುವ ಕನಿಷ್ಠ ಅರ್ಹತಾದಾಯಕ ಸೇವೆಯನ್ನು ಕಡಿಮೆಗೊಳಿಸುವ ಸಂಬಂಧ ‘ಕರ್ನಾಟಕ ಆಡಳಿತ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು -2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ 18 ವೈದ್ಯಕೀಯ ಕಾಲೇಜುಗಳ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಸಂಖ್ಯೆಯ ಮಾಡ್ಯೂಲರ್ ಆಪರೇಷನ್ ಥಿಯೇಟರ್ ಗಳನ್ನು ಒಟ್ಟು 176.70 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲು ಹಾಗೂ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಬಸವಕಲ್ಯಾಣ ನಗರದಲ್ಲಿ ನೂತನ ನ್ಯಾಯಾಲಯ ಸಂಕೀರ್ಣವನ್ನು(ನಾಲ್ಕು ನ್ಯಾಯಾಲಯ ಸಭಾಂಗಣಗಳು) 17.50 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಯನ್ನು ಪರಿಷ್ಕರಿಸಿ, ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ವಿಶೇಷ ವಿವಾಹ ಪ್ರಕರಣಗಳಲ್ಲಿ ಅರ್ಜಿಗಳನ್ನು ಹಾಗೂ ನೋಂದಣಿ ಶುಲ್ಕವನ್ನು ಆನ್‍ಲೈನ್ ಮೂಲಕ ಪಡೆಯಲು ಅವಕಾಶ ಕಲ್ಪಿಸಲು ವಿಶೇಷ ವಿವಾಹ (ಕರ್ನಾಟಕ(ತಿದ್ದುಪಡಿ)ನಿಯಮಗಳು-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಮೈಸೂರು ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ 10 ಕೋಟಿ ರೂ.ಗಳ ಅನುದಾನದಲ್ಲಿ ಲೀನಿಯರ್ ಆಕ್ಸಿಲರೇಟರ್ ಯಂತ್ರವನ್ನು ಖರೀದಿಸಲು ಹಾಗೂ ಕಲಬುರಗಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಲ್ಲಿ 106 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 150 ಹಾಸಿಗೆ ಸಾಮಥ್ರ್ಯದ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!