ಶಿರ್ವ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಕಳೆದ ರಾತ್ರಿ ನಡೆದಿದೆ.

ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55) ಗಾಯಗೊಂಡ ವ್ಯಕ್ತಿ.

ಇವರು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ.

ಕಳೆದ ನವೆಂಬರ್‌ನಲ್ಲಿ ಇದೇ ಪರಿಸರದ ಕಲ್ಲೊಟ್ಟು ದೇವಣ್ಣ ನಾಯಕ್‌ ಅವರ ಮನೆಯ ಸಾಕು ನಾಯಿಯನ್ನು ಚಿರತೆ ಬೇಟೆಯಾಡಿ ಅರ್ಧ ತಿಂದು ಹಾಕಿ ಉಳಿದರ್ಧ ದೇಹವನ್ನು ಮಲ್ಲಿಗೆ ಗಿಡದ ತೋಟದ ಬಳಿ ಬಿಟ್ಟು ಹೋಗಿತ್ತು.

ಕಳೆದ ವರ್ಷ ಚಿರತೆಯೊಂದು ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಮೊಬೈಲ್‌ ನಲ್ಲಿ ಚಿತ್ರೀಕರಿಸಿದ್ದರೆಂದು ನಂಬಲಾದ ವೀಡಿಯೋವೊಂದು ವೈರಲ್‌ ಆಗಿತ್ತು. ಆ ಸಮಯ ಅರಣ್ಯ ಇಲಾಖೆಯವ ರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ.ಈ ರಸ್ತೆಯಲ್ಲಿ ಪ್ರತೀದಿನ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.

ಪರಿಹಾರ ನೀಡಲು ಪ್ರಯತ್ನ: ಘಟನೆ ನಡೆದ ಕಲ್ಲೊಟ್ಟು ಪರಿಸರದಲ್ಲಿ ಬೋನು ಇಡಲು ಅರಣ್ಯ ರಕ್ಷಕರಿಗೆ ಸೂಚಿಸಲಾಗಿದೆ. ಗಾಯಾಳುವನ್ನು ಭೇಟಿ ಮಾಡಿ, ದಾಳಿ ನಡೆಸಿದ್ದು ಚಿರತೆಯೇ ಆಗಿದ್ದರೆ, ಮಹಜರು ನಡೆಸಿ ಸರಕಾರದಿಂದ ಗರಿಷ್ಠ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನ್‌ ದಾಸ್‌ ಶೆಟ್ಟಿ ಹೇಳಿದ್ದಾರೆ.

ಚಿರತೆ ಹಾವಳಿ ಎಚ್ಚರವಿರಲಿ
ಕಲ್ಲೊಟ್ಟು, ಸೊರ್ಪು ಅಗೋಳಿಬೈಲು ಪರಿಸರದಲ್ಲಿ ಚಿರತೆ ಹಾವಳಿ ಇದ್ದು ಗ್ರಾಮಸ್ಥರು ಎಚ್ಚರಿಕೆಯಿಂದಿರು ವಂತೆ ವಿನಂತಿಸುತ್ತೇನೆ. ಕಳೆದ ರಾತ್ರಿ ಕಲ್ಲೊಟ್ಟು ಮನೆಯೊಂದರ ಹೊರಗೆ ಜಗುಲಿಯಲ್ಲಿ ಮಲಗಿದ ವ್ಯಕ್ತಿಯೊರ್ವರ ಮೇಲೆ ಚಿರತೆ ದಾಳಿ ಮಾಡಿದ್ದು ಗಾಯಗೊಳಿಸಿದ್ದು ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಇಂದು ಚಿರತೆ ಬೋನು ಇಡುವರು ಅರಣ್ಯ ಇಲಾಖೆಯೊಂದಿಗೆ ಮಾತನಾಡಿದ್ದು ಇಂದು ಸಂಜೆಯೊಳಗೆ ಚಿರತೆಗೆ ಬೋನು ಇರಿಸುವುದಾಗಿ ತಿಳಿಸಿದ್ದಾರೆ. ಸೆಖೆ ಎಂದು ರಾತ್ರಿ ಹೊತ್ತು ಮನೆಹೊರಗೆ ಮಲಗಬೇಡಿ. ರಾತ್ರಿ ಹೊತ್ತು ಹೊರಗೆ ತಿರುಗಾಡುವಾಗ ಎಚ್ಚರವಿರಲಿ. ಮಕ್ಕಳು, ಸಾಕು ಪ್ರಾಣಿಗಳ ಬಗ್ಗೆ ಜಾಗ್ರತೆ ವಹಿಸಿ ಎಂದು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.


Leave a Reply

Your email address will not be published. Required fields are marked *

error: Content is protected !!