ಮತದಾರರು ನನ್ನ ಮತ್ತು ಶ್ರೀನಿವಾಸ್ ಪೂಜಾರಿ ಅವರ ಅಭಿವೃದ್ಧಿ ಕಾರ್ಯ ತುಲನೆ ಮಾಡಿನೋಡ ಬೇಕು- ಜಯಪ್ರಕಾಶ್ ಹೆಗ್ಡೆ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಇದರಿಂದ ಸಹಕಾರಿಯಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಶುಕ್ರವಾರ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕೋಟತಟ್ಟು, ಸಾಲಿಗ್ರಾಮ ಪಟ್ಟಣ ಪಂಚಾಯತ್, ಕೋಡಿ, ಪಾಂಡೇಶ್ವರ, ಐರೋಡಿ ಭಾಗದಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಮೊದಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು. ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದವರು ಪ್ರಶ್ನಿಸಿದರು.

ತಾನು ಮೀನುಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಕೂಡ ಅದೇ ಖಾತೆಯನ್ನು ನಿರ್ವಹಿಸಿದ್ದರು. ಜನರು ಮತ್ತು ಕಾರ್ಯಕರ್ತರು ಇಬ್ಬರ ಕೆಲಸವನ್ನು ತುಲನೆ ಮಾಡಿನೋಡಬೇಕಿದೆ. ನಿರಂತರವಾಗಿ ನಡೆಯುವ ಕಾರ್ಯಕ್ರಮ ಯಾರು ಕೂಡ ಸಚಿವರಾಗಿ ಮಾಡಬಹುದು. ಆದರೆ ಮೀನುಗಾರರಿಗೆ ಹೊಸ ಯೋಜನೆಗಳನ್ನು ತರುವುದರ ಮೂಲಕ ಅಭಿವೃದ್ಧಿ ಮಾಡುವುದು ಮುಖ್ಯ. ಆ ಕೆಲಸವನ್ನು ನಾನು ನನ್ನ ಸಚಿವ, ಸಂಸದ ಮತ್ತು ಶಾಸಕ ಅವಧಿಯಲ್ಲಿ ಮಾಡಿದ್ದು ಕಾರ್ಯಕರ್ತರು ಈ ವಿಚಾರವನ್ನು ಮತದಾರರಿಗೆ ಮನಮುಟ್ಟುವಂತೆ ಹೇಳಬೇಕಾದ ಅಗತ್ಯತೆ ಇದೆ ಎಂದರು.

ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ ಜಯಪ್ರಕಾಶ್ ಹೆಗ್ಡೆ ಸದಾ ಜನರಿಗೆ ಲಭ್ಯವಿರುವ ವ್ಯಕ್ತಿಯಾಗಿದ್ದು ಸಚಿವ, ಸಂಸದರಾಗಿದ್ದ ಸಮಯದಲ್ಲಿ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಅನುಭವಿ ರಾಜಕಾರಣಿಯಾಗಿದ್ದು ಒರ್ವ ಉತ್ತಮ ಸಂಸದನಾಗುವಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಮುಂದಿನ ಕೆಲವೇ ದಿನಗಳ ಅವಧಿಯಲ್ಲಿ ಶಕ್ತಿ ಮೀರಿ ಅವರ ಗೆಲುವಿಗೆ ಪ್ರಯತ್ನಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಪಕ್ಷದ ಹಿರಿಯ ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ಇಂದಿನ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ನಾಯಕ ರಾದ ವಿನಯ್ ಕಬ್ಯಾಡಿ, ಪ್ರಕಾಶ್‌ಚಂದ್ರ ಶೆಟ್ಟಿ ಕಂಬದ ಕೋಣೆ, ತಿಮ್ಮ ಪೂಜಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!