ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ: ಆರ್‌. ಅಶೋಕ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯವು ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯಿತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೇ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ” ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು?. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ಮೇಲೆ ವಿಧಾನಸೌಧದಲ್ಲೇ ಪಾಕಿಸ್ತಾನ್ ಝಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆ ಎಂದು ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆ ಎಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಶನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ ಎಂದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!