ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಜೂ 20(ಉಡುಪಿ ಟೈಮ್ಸ್ ವರದಿ)ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯಮವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ಬ್ಯಾನ್ ಮಾಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಇತ್ತೀಚೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ಫೆಬ್ರವರಿ 2024ರಲ್ಲಿ ಹೊರಡಿಸಲಾದ ಆದೇಶದ ಪ್ರಕಾರ ರಾಷ್ಟ್ರೀಯ ರಜಾದಿನಗಳು, ರಾಜ್ಯ ಹಬ್ಬಗಳು ಮತ್ತು ಜಯಂತಿಗಳನ್ನು ಮಾತ್ರ ಆಚರಿಸಲು ಅನುಮತಿ ಇದೆ.ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಎಲ್ಲಾ ವರ್ಗದ ಮಕ್ಕಳು ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸ ಬೇಕಾಗುತ್ತದೆ. ಅದ್ದೂರಿಯಾಗಿ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ.

ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!