ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಬರ್ಬರ ಹತ್ಯೆ

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ.

ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ಫಾಸ್ಟ್‌ಫುಡ್‌ಗೆ ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

ಘಟನೆಯ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರ ಜೊತೆಗೆ ಹುಡುಕಾಡಿದ್ದು ಶಮೀರ್ ಮತ್ತು ಆತನನ್ನು ಅಟ್ಟಾಡಿಸಿಕೊಂಡು ಹೋದ ತಂಡವೂ ಪತ್ತೆಯಾಗಿರಲಿಲ್ಲ. ಇಬ್ವರೂ ತಪ್ಪಿಸಿಕೊಂಡು ಹೋಗಿದ್ದರು ಎಂದು ಪೊಲೀಸರು ಹುಡುಕಾಟ ನಡೆಸಿ ತೆರಳಿದ್ದರು. ಈ ಸಂದರ್ಭದಲ್ಲಿ ಕೊಲೆಯಾದ ಶಮೀರ್ ಓಡಿದ ಸ್ಥಳದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಜನರು ಜಮಾಯಿಸಿದ್ದು ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಇಲ್ಯಾಸ್ ಕೊಲೆ ಆರೋಪಿ
2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ಶಮೀರ್ ಕಡಪ್ಪರ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾಗಿದ್ದ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!