ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ -ಜಿಲ್ಲಾಧಿಕಾರಿ

ಉಡುಪಿ, ಸೆ.18: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದರೆ, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ವಾಂತಿ ಬೇಧ ಪ್ರಕರಣಗಳು ಕಂಡುಬಂದು ಕಾಲರಾ ರೋಗ ಎಂದು ವರದಿ ಬಂದಿರುತ್ತದೆ.

ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಮುಂಜಾಗೃತೆ ವಹಿಸಬೇಕು ಎಂದರು. ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಇಟ್ಟುಕೊಳ್ಳಬೇಕು ಎಲ್ಲಾ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಊಟ ತಯಾರಿ ಹಾಗೂ ಊಟ ಮಾಡುವ ಮುನ್ನಾ ಕೈಗಳನ್ನು ಸಾಬೂನಿನಿಂದ ಸ್ವಚ್ಛಗೊಳಿಸಬೇಕು. ಶೌಚಾಲಯಗಳನ್ನು ಬಳಸಿದ ನಂತರವು ಸಹ ಕೈಗಳನ್ನು ಸಾಬೂನಿನಿಂದ ತೊಳೆದು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಹೋಟೆಲ್, ರೇಸ್ಟೂರೆಂಟ್‌ನಲ್ಲಿ ಜನರಿಗೆ ಕುಡಿಯಲು ಬಿಸಿ ನೀರನ್ನು ನೀಡಬೇಕು. ಹೋಟೆಲ್‌ಗಳಲ್ಲಿ ಬಳಸುವ ಲೋಟ, ತಟ್ಟೆ ಹಾಗೂ ಪಾತ್ರೆಗಳನ್ನು ಸಹ ಬಿಸಿ ನೀರಿನಲ್ಲಿ ತೊಳೆಯಬೇಕು. ಯಾವುದೇ ಸಮುದ್ರದ ಉತ್ಪನ್ನಗಳನ್ನು ಮುಟ್ಟಿದಾಗ ಸರಿಯಾಗಿ ಕೈತೊಳೆದು ಆಹಾರ ಪದಾರ್ಥಗಳನ್ನು ಮುಟ್ಟುವುದು ಸೂಕ್ತ ಎಂದರು.

ಸಾರ್ವಜನಿಕರು ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿನಿಸು ಹಾಗೂ ತಳ್ಳು ಗಾಡಿಯಲ್ಲಿ ಮಾರಾಟ ಮಾಡುವ ಆಹಾರಗಳನ್ನು ಹಾಗೂ ಹಣ್ಣುಗಳನ್ನು ಸೇವಿಸಬಾರದು. ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸ್ವಚ್ಛವಾಗಿ ತೊಳೆದು ಆಹಾರ ಉತ್ಪನ್ನಗಳನ್ನು ಬಳಸುವ ಬಗ್ಗೆ ಅರಿವು ಮೂಡಿಸಬೇಕು ಎಂದರು. ಕಾಲರಾ ಸೋಂಕುಕಾರಕ ತೀವ್ರತರವಾದ ನೀರಿನಿಂದ ಕೂಡಿದ ಅತೀಸಾರಕ್ಕೆ ನಿರ್ಜಲೀಕರಣಕ್ಕೆ ಕಾರಣವಾಗಬಹುದು.

ವಿಬ್ರಿಯೊ ಕಾಲರಾ ಎಂಬ ಬ್ಯಾಕ್ಟಿರೀಯದಿಂದ ಕಲುಷಿತವಾದ ಆಹಾರವನ್ನು ತಿನ್ನುವುದರಿಂದ ಹರಡುತ್ತದೆ. ಸ್ವಚ್ಛತೆಗೆ ಆದ್ಯತೆ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುತ್ತದೆ. ಸೋಂಕು ಇರುವ ಆಹಾರ ಅಥವಾ ನೀರಿನ ಸೇವನೆಯಿಂದ ಬ್ಯಾಕ್ಟಿರೀಯಾ ದೇಹವನ್ನು ಪ್ರವೇಶಿಸುತ್ತದೆ. ಮನೆಗೆ ತರುವ ಎಲ್ಲಾ ರೀತಿಯ ತರಕಾರಿ ಹಣ್ಣು ಹಾಗೂ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ನೀರಿನಿಂದ ತೊಳೆದು ಸ್ವಚ್ಛಗೊಳಿಸಿ ಬಳಸಬೇಕು. ತೀವ್ರವಾದ ಅತಿಸಾರ ವಾಂತಿ ಹಾಗೂ ನಿರ್ಜಲೀಕರಣದಂತಹ ರೋಗ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.ಡೆಂಗ್ಯೂ, ಚಿಕನ್ ಗುನ್ಯ, ಝೀಕಾ ರೋಗಗಳು ವೈರಸ್ ಸೋಂಕಿತ ಈಡೀಸ್ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ನಗರ ಹಾಗೂ ಗ್ರಾಮೀಣ ಪ್ರದೇಶ ಜನರು ಮಳೆಯ ನೀರು ಅಥವಾ ಇತರೆ ನೀರುಗಳು ಎಲ್ಲೆಂದರಲ್ಲೆ ನಿಂತು ಸೊಳ್ಳೆಗಳ ಉತ್ಪನ್ನ ತಾಣಗಳನ್ನಾಗದೇ ಇರುವಂತೆ ಎಚ್ಚರ ವಹಿಸಬೇಕು ಎಂದರು.

ಮಳೆಗಾಲ ನಿಂತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾವಿ ಹಾಗೂ ನಳ ನೀರು ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಕೈಗೊಂಡು ಅವುಗಳು ಬಳಕೆಗೆ ಯೋಗ್ಯವಾಗಿದೆ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದರು.ಕಳೆದ ಸೆಪ್ಟಂಬರ್ 14 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಚತಾ ಸೇವಾ ಅಭಿಯಾನವನ್ನು ಅಂದೋಲನದ ರೀತಿಯಲ್ಲಿ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳು ಬಸ್ ನಿಲ್ದಾಣ ರೈಲ್ವೆ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಆದ್ಯತೆ ವಹಿಸಬೇಕು ಎಂದು ಸೂಚನೆ ನೀಡಿದರು.

ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಗರ್ಭಿಣಿ ಮಹಿಳೆಯರ ಆರೋಗ್ಯ ಸುಧಾರಣೆ ಕುರಿತು ಮಾಹಿತಿಗಳನ್ನು ಕ್ರೋಢಿಕರಿಸುವ ಜನನಿ ಆಫ್ ಅನ್ನು ಸೃಜನಿಸಿದ್ದು ಇದರ ಪ್ರಾತ್ಯಕ್ಷೀತೆಯನ್ನು ಸಭೆಯಲ್ಲಿ ಪ್ರದರ್ಶಿಸಿ ಸಾಧಕ ಭಾದಕಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಂ.ಐ.ಟಿ ಡೈರೆಕ್ಟರ್ ಡಾ. ಅನಿಲ್ ರಾಣಾ, ಎಂ.ಐ.ಟಿ ಉಪನಿರ್ದೇಶಕ ಸೋಮಶೇಖರ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!