ಡಿಕೆಶಿ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಿದ್ದರು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಎಂ.ಬಿ ಪಾಟೀಲ್

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆದಿದ್ದ ಔತಣಕೂಟದಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು ಎಂದು ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್‌ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಇದಕ್ಕೆ ಪರಮೇಶ್ವರ್‌ ಭಾಗವಹಿಸಿರಲಿಲ್ಲ. ಏಕೆಂದರೆ, ಅವರ ಆಪ್ತರೊಬ್ಬರು ನಿಧನರಾಗಿದ್ದ ಕಾರಣ ಅವರ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷದವರು ಸುಮ್ಮನೇ ವಿವಾದಗಳನನ್ನೆಬ್ಬಿಸುತ್ತಾರೆ. ಈ ಭೋಜನಾಕೂಟದಲ್ಲಿ ಮುಖ್ಯಮಂತ್ರಿ ಸೇರಿದಂತೆ, ಸಚಿವ ಸತೀಶ್‌ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭಾಗವಹಿಸುವ ಮೂಲಕ ಈ ವಿವಾದಗಳಿಗೆ ತೆರೆ ಎಳೆದಿದ್ದಾರೆ ಎಂದು ತಿಳಿಸಿದರು.

ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸುತ್ತಾರೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದರು.

ಕೆಪಿಸಿಸಿಯ ಮುಖ್ಯಸ್ಥರು ಯಾರು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!