ಸಾಹಿತಿ ಬಾನು ಮುಷ್ತಾಕ್‌ಗೆ ಗೆಲುವು: ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ವಜಾ

ನವದೆಹಲಿ: ನಾಡಿನ ಹಿರಿಯ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಲು ಇದ್ದ ಕಾನೂನು ತೊಡಕು ಬಗೆಹರಿದಿದೆ.

ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಬೆಂಗಳೂರಿನ ಹಾಲನಾಯಕನಹಳ್ಳಿಯ ನಿವಾಸಿ ಎಚ್.ಎಸ್. ಗೌರವ್ ಎಂಬುವವರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾ. ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠವು ಇಂದು ಅರ್ಜಿಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದ ಆಲಿಸಿದ ಪೀಠ, ‘ನಮ್ಮ ದೇಶದ ಸಂವಿಧಾನದ ಪ್ರಸ್ತಾವನೆ ಏನು?’ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಲು ಅರ್ಜಿದಾರರು 3 ನಿಮಿಷ ಸಮಯ ಕೋರಿದರು.

ರಾಜಕೀಯ ಪ್ರೇರಿತ

ದೂರುದಾರರು, ದಸರಾ ಉದ್ಘಾಟನೆಯಂತಹ ಧಾರ್ಮಿಕ ಸಮಾರಂಭವನ್ನು ಅನ್ಯ ಧರ್ಮದ ವ್ಯಕ್ತಿ ಉದ್ಘಾಟಿಸುವುದು ಸೂಕ್ತವಲ್ಲ ಎಂದು ವಾದಿಸಿದರು. ಇದೊಂದು ರಾಜಕೀಯ ಉದ್ದೇಶದಿಂದ ಮಾಡಿದ ಕ್ರಮ ಎಂದು ಅರ್ಜಿದಾರರು ಆರೋಪಿಸಿದರು.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು. ಉಭಯ ವಾದ ಆಲಿಸಿದ ನಂತರ, ನ್ಯಾಯಪೀಠವು ದೂರುದಾರರ ಅರ್ಜಿಯನ್ನು ವಜಾಗೊಳಿಸಿತು.

ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

ಬಾನು ಮುಸ್ತಾಖ್ ಅವರಿಗೆ ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲ. ಅವರು ಹಿಂದೂ ವಿರೋಧಿಯಾಗಿದ್ದು, ಭುವನೇಶ್ವರಿಯನ್ನು ಅಪಮಾನ ಮಾಡಿದ್ದಾರೆ. ಬಾನು ಮುಷ್ತಾಕ್ ಆ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚಿಸಿದರೆ, ಅವರು ಸೆಪ್ಟೆಂಬರ್ 22 ರಂದು ದಸರಾ ಉದ್ಘಾಟನೆಗೆ ನಮ್ಮ ಅಭ್ಯಂತರವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು

Leave a Reply

Your email address will not be published. Required fields are marked *

error: Content is protected !!