ಮಾನವ ಹಕ್ಕುಗಳ ಆಚರಣೆಯಿಂದ ಜನ ಸಾಮಾನ್ಯರಲ್ಲಿ ಅರಿವು – ಡಿಹೆಚ್‌ಓ

ಉಡುಪಿ, ಡಿ. 10: ಮಾನವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಇಂದು
ವಿಶ್ವದಾದ್ಯಂತ ಮಾನವ ಹಕ್ಕುಗಳನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳ ಆಚರಣೆಯನ್ನು ಆಚರಿಸುವುದರ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದರು.

ಅವರು ಇಂದು ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಾನವನಿಗೆ ಸುಗಮ ಜೀವನ ನಡೆಸಲು ಮಾನವ ಹಕ್ಕುಗಳು ಅತ್ಯಗತ್ಯ. ಮಾನವ ಹಕ್ಕುಗಳನ್ನು ಗೌರವಿಸಿ, ಹಕ್ಕುಗಳ ಉಲ್ಲಂಘನೆಯಾಗದ0ತೆ ಎಚ್ಚರ ವಹಿಸಬೇಕು. ಪ್ರತಿಯೊಬ್ಬ ನಾಗರಿಕ ಘನತೆ, ಗೌರವದಿಂದ ಕೂಡಿದ ಬದುಕುವ ಹಕ್ಕು ಹೊಂದಿರಬೇಕೆ0ಬುವುದು ಮಾನವ ಹಕ್ಕುಗಳ ಆಶಯ. ಹೀಗಾಗಿ ಸಾಮಾಜಿಕ, ಆರ್ಥಿಕ, ಆರೋಗ್ಯ, ಸಮಾನತೆ ಸೇರಿದಂತೆ ಎಲ್ಲ ಬಗೆಯ ಮಾನವ ಹಕ್ಕುಗಳನ್ನು ಉಳಿಸಿ, ರಕ್ಷಿಸುವ ಕೆಲಸವಾಗಬೇಕು ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಿದರೆ, ಮಾತ್ರ ಸಮಾಜದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಬಗ್ಗೆ ಮಾಹಿತಿ ಪಡೆದು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಕೀಲ ಮುಂಡ್ಕೂರು ವಿನಯ್ ಆಚಾರ್ಯ ಮಾತನಾಡಿ, ಮಾನವ ಸಹಜವಾಗಿ ಹುಟ್ಟಿನಿಂದ ಪಡೆದಿರುವ ನೈಸರ್ಗಿಕವಾದ ಹಕ್ಕುಗಳೇ ಮಾನವ ಹಕ್ಕುಗಳು. ಮನುಷ್ಯರಿಗೆ ಸ್ವತಂತ್ರವಾಗಿ ಜೀವಿಸುವ ಹಕ್ಕು ಸಮಾಜದಲ್ಲಿ ದೊರೆತ್ತಿದ್ದು, ಜನಸಾಮಾನ್ಯರ ಮೇಲೆ ಅಗುವ ಶೋಷಣೆಯನ್ನು
ತಡೆದು, ಮಾನವೀಯ ಮೌಲ್ಯದಲ್ಲಿ ಸ್ವತಂತ್ರವಾಗಿ ಬದುಕುವ ಹಕ್ಕು ಸಮಾಜದಲ್ಲಿ ಮಾನವನಿಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್‌ನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿದರು, ಗೌರವ ಕಾರ್ಯದರ್ಶಿ ಕೆ.ಜಯರಾಮ ಆಚಾರ್ಯ ಸಾಲಿಗ್ರಾಮ ನಿರೂಪಿಸಿದರು, ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!