ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ- ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನ
Oplus_131072
ಕೇಂದ್ರ ಸರಕಾರ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದೆ- ಕೃಷ್ಣ ಶೆಟ್ಟಿ ಬಜಗೋಳಿ ಆಕ್ರೋಶ
ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ಕೇಂದ್ರ ಸರಕಾರದ ವೈಫಲ್ಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಕ್ರೋಶ ಹೊರಹಾಕಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಅಚ್ಚೆ ದಿನ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದವರು ಈಗ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ.ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲಕ ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ವಾಡುತ್ತಿದೆ ಟೀಕಿಸಿದರು.

ಕೋಮು ಸಂಬಂಧಿತ ವಿಚಾರಗಳಿಗೆ ತಕ್ಷಣ ಪ್ರತಿಕ್ರಿಯೆ ನೀಡುವ ಉಡುಪಿ ಸಂಸದರು, ಶಾಸಕರು, ಈ ಬಗ್ಗೆ ಮಾತ್ರ ಮೌನ ವಹಿಸಿದ್ದಾರೆ. ಹಿಜಾಬ್, ಕೇಸರಿ ಶಾಲುಗಳ ಬಗ್ಗೆ ಮಾತನಾಡುವ ಇವರು ನೀಟ್ ಪರೀಕ್ಷೆಯಿಂದ ಅನ್ಯಾಯವಾಗಿರುವ ಮಕ್ಕಳ ಬಗ್ಗೆ ಯಾಕೆ ಮಾತನಾಡುತಿಲ್ಲ ಎಂದು ಪ್ರಶ್ನಿಸಿದರು.

ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಡಿಸಿ ಕಚೇರಿ ಗೇಟ್ನಲ್ಲಿಯೇ ಪ್ರತಿಭಟನಕಾರರನ್ನು ತಡೆದು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡೆ ಸುರಯ್ಯ ಅಂಜುಮ್, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಯತೀಶ್ ಕರ್ಕೇರ, ಯುವ ಕಾಂಗ್ರೆಸ್ ಮುಖಂಡರಾದ ಅಜಿತ್ ಶೆಟ್ಟಿ, ಸುದೇಶ್ ಶೆಟ್ಟಿ, ನವೀನ್ ಸಾಲ್ಯಾನ್ ಕುಕ್ಕೆಹಳ್ಳಿ, ಆತೀಫ್, ಪ್ರದೀಪ್ ಶೆಟ್ಟಿ ನಲ್ಲೂರು, ಮಂಜುನಾಥ್ ಶೆಟ್ಟಿ, ಅಕ್ಷತ್ ಪೈ, ಶಿರಿಶ್, ಜುನೈದ್, ಶಶಿಧರ್ ಹವಾಲ್ದಾರ್ಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.





