ಉಪ್ಪೂರು ಬಳಿ ಹಿಟ್ ಆ್ಯಂಡ್ ರನ್: ಅಪರಿಚಿತ ವ್ಯಕ್ತಿ ಸಾವು
ಬ್ರಹ್ಮಾವರ, ಮೇ 16: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಕುದ್ರುಬೆಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 15ರಂದು ರಾತ್ರಿ ಸಂಭವಿಸಿದೆ.
ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಸಾಗುತ್ತಿದ್ದ ಬಿಳಿ ಬಣ್ಣದ ಕಾರೊಂದು ರಸ್ತೆ ದಾಟಲು ನಿಂತಿದ್ದ ಸುಮಾರು 30ರಿಂದ 35 ವರ್ಷ ಪ್ರಾಯದ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮೃತರ ಗುರುತು ಅಥವಾ ಸಂಬಂಧಿಕರ ಮಾಹಿತಿ ಇರುವವರು ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0820-2561044 ಅಥವಾ ಮೊಬೈಲ್ ಸಂಖ್ಯೆ 9480805453 ಅನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.





