ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುವ ಬಿಜೆಪಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್

ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಕೇಸರಿ ಪಕ್ಷವೇ “ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಕರೆದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ತನ್ನ ‘ಅಹಂ’ ಅನ್ನು ಬದಿಗಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಕೇಳಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಯಾರಾದರು ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರೆ ಅವರನ್ನು ‘ದೇಶಭಕ್ತ’ ಎಂದು ಕರೆಯಲಾಗುತ್ತದೆ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು “ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಬ್ರಾಂಡ್ ಮಾಡಲಾಗುತ್ತಿದೆ. ಆದರೆ ಬಿಜೆಪಿಯೇ ದೇಶದ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಐಕ್ಯತೆಯನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ಕೃಷಿ ಕಾನೂನುಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಸ್‌ಎಡಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದು, ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಎಸ್‌ಎಡಿ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!