ರಿಯಲ್ ಎಸ್ಟೇಟ್ ಹೂಡಿಕೆ ಹೆಸರಲ್ಲಿ ₹70 ಲಕ್ಷ ವಂಚನೆ ಆರೋಪ: ಬ್ಲ್ಯಾಕ್ಮೇಲ್, ಜೀವ ಬೆದರಿಕೆ ಪ್ರಕರಣದಲ್ಲಿ ಮಹಿಳೆ ಬಂಧನ
ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಉಡುಪಿ ಮೂಲದ ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆ ಜೀನತ್ ಇಬ್ರಾಹಿಂ ಅವರ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು. ಈ ವೇಳೆ ಆರೋಪಿತೆಯ ಮಾತು ನಂಬಿದ ದೂರುದಾರರು ಹೂಡಿಕೆ ಉದ್ದೇಶದಿಂದ ₹70 ಲಕ್ಷ ಹಣವನ್ನು ನೀಡಿದ್ದು, ಜಮೀನು ಖರೀದಿಗೆ ಬಳಸಬೇಕಿದ್ದ ಹಣವನ್ನು ಆರೋಪಿತೆ ತನ್ನ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ದೂರುದಾರರು ತಮ್ಮ ಕಚೇರಿ ಮುಚ್ಚುವ ವೇಳೆ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಹಾಗೂ ಪೆನ್ಡ್ರೈವ್ಗಳು ದೊರೆತಿದ್ದು, ಅವುಗಳಲ್ಲಿ ಹಲವಾರು ಪ್ರಭಾವಿ ವ್ಯಕ್ತಿಗಳ ಖಾಸಗಿ ಹಾಗೂ ಅಶ್ಲೀಲ ಛಾಯಾಚಿತ್ರಗಳು ಮತ್ತು ವಿಡಿಯೊಗಳು ಇರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಣವನ್ನು ವಾಪಸ್ ಕೇಳಿದಾಗ ಆರೋಪಿತೆ ದೂರುದಾರರ ಹೊಸ ಕಚೇರಿಗೆ ಬಂದು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ತನ್ನ ಬಳಿ ದೂರುದಾರರ ಅಶ್ಲೀಲ ವಿಡಿಯೊಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಅಲ್ಲದೆ, ದೂರುದಾರರ ಪತ್ನಿ ಹಾಗೂ ಮಕ್ಕಳನ್ನು ಅಪಹರಿಸಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ. ಸಬೀನಾ ಇಲಿಯಾಸ್ ಹಾಗೂ ಇತರರು ಆರೋಪಿತೆಯೊಂದಿಗೆ ಸೇರಿ ಅಕ್ರಮವಾಗಿ ಹಣ ವಸೂಲಿ ಮಾಡುವ ಜಾಲ ನಡೆಸುತ್ತಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ಕಾಂಗ್ರೆಸ್ ಮುಖಂಡ ಸಹಿತ ಹಲವಾರು ಉದ್ಯಮಿಗಳ ಅಶ್ಲೀಲ ವಿಡಿಯೋ ಇರುವ ಪೆನ್ಡ್ರೈವ್ ಪತ್ತೆ: ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಹಲವು ಉದ್ಯಮಿಗಳು ಮಹಿಳೆಯರ ಜೊತೆ ಇರುವ ಅಶ್ಲೀಲ ವಿಡಿಯೋ ಹಿಡಿದುಕೊಂಡು ಬೆದರಿಸಿ ಹಣ ವಸೂಲಿ ಮಾಡಿದ್ದಾಳೆ. ಈಕೆ ಈಗಾಗಲೇ ಲಕ್ಷಾಂತರ ರೂ ದೊಚಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 79/2026ರಡಿ ಬಿಎನ್ಎಸ್ ಕಲಂ 308(6), 351(2), 318(2) ಹಾಗೂ 3(5) ಅನ್ವಯ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಗಾಗಿ ಪಿಎಸ್ಐ (ಕಾನೂನು ಮತ್ತು ಸುವ್ಯವಸ್ಥೆ) ಭರತೇಶ್ ಕಂಕಣವಾಡಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಜುಲೈ 2ರಂದು ಆರೋಪಿತೆ ಜೀನತ್ ಇಬ್ರಾಹಿಂ (ಪತಿ: ಅಬ್ದಲ್ ಸಲಾಂ), ಕಂಚಿನಡ್ಕ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಿದ್ದವರನ್ನು ಪಡುಬಿದ್ರೆಯ ಕಂಚಿನಡ್ಕದಲ್ಲಿ ಬಂಧಿಸಿದೆ.
ಬಂಧಿತ ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಆರೋಪಿತೆಯಿಂದ ಇದೇ ರೀತಿಯ ಮೋಸ ಅಥವಾ ವಂಚನೆಗೆ ಒಳಗಾಗಿರುವವರು ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.





