ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ – ಆರೋಪಿ ಪತಿಯ ಬಂಧನ
ಬೆಳ್ತಂಗಡಿ: ಪತಿಯು ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಿನ್ನೆ ರಾತ್ರಿ ನಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ಸನ್ (47) ಬಂಧಿತ ಆರೋಪಿ ಪತಿ, ಸೌಮ್ಯಾ ಫ್ರಾನ್ಸಿಸ್ (40) ಕೊಲೆಯಾದ ಮಹಿಳೆ ಪತಿ-ಪತ್ನಿ ಇಬ್ಬರೂ ರಬ್ಬರ್ ಟ್ಯಾಪಿಂಗ್ ವೃತ್ತಿ ನಿರ್ವಹಿಸುತ್ತಿದ್ದರು. ಇಬ್ಬರ ನಡುವೆ ಪ್ರತಿನಿತ್ಯವೂ ಜಗಳ ಸಾಮಾನ್ಯವಾಗಿತ್ತು. ಆದರೆ, ಗುರುವಾರ ರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಪತಿ ಜಾನ್ಸನ್ ಕಟ್ಟಿಗೆಯ ತುಂಡಿನಲ್ಲಿ ಸೌಮ್ಯಾರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡ ಸೌಮ್ಯ ಅವರು ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ಗಾಬರಿಗೊಂಡ ಜಾನ್ಸನ್ ತಕ್ಷಣ ಅವರನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾನೆ. ಆದರೆ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿರುವಾಗ ಸೌಮ್ಯ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಸೌಮ್ಯಾ ಅವರ ಸಹೋದರ ಸನೋಜ್ ಫ್ರಾನ್ಸಿಸ್ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.