ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ್ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗಳಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಂದರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. ಆದರೆ, ಸಚಿವ ಪಾಟೀಲ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಮಾರ್ಚ್ 2 ರಂದು, ಹಿರೇಕೆರೂರು  ತಾಲ್ಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಸಚಿವ ಪಾಟೀಲ್ ಅವರ ಮನೆಗೆ ಭೇಟಿ ನೀಡಿ ಲಸಿಕೆಯ ಮೊದಲ ಡೋಸ್ ನೀಡಿದ್ದರು.ಇದು ವ್ಯಾಕ್ಸಿನೇಷನ್ ಗೆ  ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದ್ದು  ಆರೋಗ್ಯ ಸಚಿವಾಲಯದ ಮಾನದಂಡಗಳ ಉಲ್ಲಂಘನೆಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದ ಹಾಗೆ  ಅನೇಕ ಜನರು ಸಚಿವ ಪಾಟೀಲ್ ಮತ್ತು ಆರೋಗ್ಯ ಇಲಾಖೆಯನ್ನು ಟೀಕಿಸಿದ್ದರು. ನಂತರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಯನ್ನು ವಿವರಣೆ ಕೇಳಿತ್ತು.

ಸಚಿವರ ಕೋರಿಕೆಯ ಮೇರೆಗೆ ಹಿರೇಕೆರೂರು ತಾಲ್ಲೂಕು ಆರೋಗ್ಯ ಅಧಿಕಾರಿ ಯಾವುದೇ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸದೆ ತಮ್ಮ ಸಿಬ್ಬಂದಿಯನ್ನು ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಇಲಾಖೆಗೆ ಮನವರಿಕೆಯಾಗಿತ್ತು.

ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಡಾ.ಮಕಂದರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!