70 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಭೂಮಾಪನ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು: ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಸೇರಿ ನಾಲ್ವರು ಅಧಿಕಾರಿಗಳ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿದ್ದಾರೆ.

ಆಸ್ತಿಯೊಂದರ ಭೂಮಾಪನ ನಡೆಸಿ, ಗಡಿ ಗುರುತಿಸಲು 70 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ರೂ. ಪಡೆದಿರುವ ಆರೋಪದಡಿ ದಾಳಿ ಮಾಡಲಾಗಿದೆ.

ಬೆಂಗಳೂರು ಉತ್ತರ ಹೆಚ್ಚುವರಿ ತಾಲ್ಲೂಕಿನ ಕುದುರೆಗೆರೆ ಗ್ರಾಮದಲ್ಲಿನ ಸ್ವತ್ತಿನ ಗಡಿ ಗುರುತಿಸಲು ಹೈಕೋರ್ಟ್ ಆದೇಶದನ್ವಯ ಪ್ರಕ್ರಿಯೆ ನಡೆಸುವಂತೆ ಕೋರಿ ನಾಗದಾಸನಪುರ ನಿವಾಸಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು 70 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಆನಂದ ಕುಮಾರ್, 20 ಲಕ್ಷ ರೂ. ಪಡೆದಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಎಸಿಬಿಗೆ ದೂರು ನೀಡಿದ್ದರು.

ಆನಂದ ಕುಮಾರ್, ಅವರ ಕಚೇರಿಯ ಹೊರ ಗುತ್ತಿಗೆ ನೌಕರ ರಮೇಶ್, ಭೂಮಾಪನ ಇಲಾಖೆ ಉಪ ನಿರ್ದೇಶಕಿ ಕುಸುಮಲತಾ ಮತ್ತು ಭೂಮಾಪಕ ಶ್ರೀನಿವಾಸ್ ಅವರ ಮನೆಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಶೋಧ ಕಾರ್ಯ ನಡೆಸಿದ್ದಾರೆ. 

ಆರೋಪಿಗಳ ಮನೆಗಳಲ್ಲಿ 25.70 ಲಕ್ಷ ರೂಪಾಯಿ ನಗದು ಹಾಗೂ 70 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಕುಮಾರ್ ಮತ್ತು  ಹೊರ ಗುತ್ತಿಗೆ ನೌಕರ ರಮೇಶ್ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!