ಅಂಬಲಪಾಡಿ: ಎರಡು ಮನೆಗಳಲ್ಲಿ ಕಳ್ಳತನ
ಉಡುಪಿ ಅ.16(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಡೆದ ಎರಡು ಕಳ್ಳತನ ಪ್ರಕರಣದಲ್ಲಿ ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ.
ಉಡುಪಿ ನಗರದಲ್ಲಿ ನಡೆದ ಒಂದು ಪ್ರಕರಣದಲ್ಲಿ ಅ.15 ರಂದು ಅಂಬಲಪಾಡಿ ಗ್ರಾಮದ ಕುಂಜಿಗುಡ್ಡೆ ಎಂಬಲ್ಲಿ ರಕ್ಷಿತ್ ಶೆಟ್ಟಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲಿನಿಂದ ಒಳ ನುಗ್ಗಿದ ಕಳ್ಳರು ಕೋಣೆಯಲ್ಲಿ ಕಪಾಟಿನಲ್ಲಿದ್ದ 1,80,000 ರೂ ಮೌಲ್ಯದ ಒಟ್ಟು 45 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅ.15 ರಂದು ನಗರದ ಅಂಬಲಪಾಡಿ ಗ್ರಾಮದ ಗುಣಲತಾ ಶೆಟ್ಟಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಂಚುಗಳನ್ನು ತೆಗೆದು ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 5000 ರೂ. ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.