ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅನುದಾನ ದುರ್ಬಳಕೆ-ವ್ಯವಸ್ಥಾಪಕ ನಿರ್ದೇಶಕಿ ಬಂಧನ

ಬೆಂಗಳೂರು, ಜೂ.16: ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅಸಹಕಾರ ತೋರಿದ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯೊಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ ನಾಗರಾಜಪ್ಪ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಈ ಬಗ್ಗೆ ಅಧಿಕಾರಿಗಳ ವಿರುದ್ಧ ಎಫ್‌.ಐ.ಆರ್ ದಾಖಲಿಸಿರುವ ಎಸಿಬಿ ಬೆಂಗಳೂರು ನಗರ ಘಟಕದ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದು,ಪ್ರಕರಣದ ತನಿಖೆಗೆ ಅಗತ್ಯವಿರುವ ಕಡತಗಳನ್ನು ಒದಗಿಸುವಂತೆ ಲೀಲಾವತಿ ಅವರಿಗೆ ಸೂಚಿಸಲಾಗಿತ್ತು. ಆದರೆ, ಲೀಲಾವತಿ ಕಡತಗಳನ್ನು ಒದಗಿಸದೇ‌ ತನಿಖೆಗೆ ಅಸಹಕಾರ ತೋರುತ್ತಿದ್ದರು. ಈ ಕಾರಣದಿಂದ ಅವರನ್ನು ಬಂಧಿಸಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉದ್ಯಮಶೀಲತಾ ಯೋಜನೆಯ 2018-19, 2019-20 ಮತ್ತು 2020 21ನೇ ಸಾಲಿನಲ್ಲಿ ಉದ್ಯಮಶೀಲತಾ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಂಜೂರಾದ ಮೊತ್ತಕ್ಕಿಂತಲೂ ಹೆಚ್ಚು ಜಮೆ ಮಾಡಿರುವುದು ಹಾಗೂ ನಕಲಿ ಫಲಾನುಭವಿಗಳ ಪಟ್ಟಿಯನ್ನು ಸೃಷ್ಟಿಸಿ 150 ಕೋಟಿ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

error: Content is protected !!