ಹೆಬ್ರಿ: ಕಡಿಮೆ ಅಂಕ ಪಡೆದಿದ್ದಕ್ಕೆ ಶಾಲಾ ಆಡಳಿತ ಮಂಡಳಿ ತರಾಟೆ- ವಿದ್ಯಾರ್ಥಿನಿ ಆತ್ಮಹತ್ಯೆ
ಹೆಬ್ರಿ ನ.28 : ಕಡಿಮೆ ಅಂಕ ಪಡೆದಿದ್ದಕ್ಕೆ ಶಾಲೆಯ ಆಡಳಿತ ಮಂಡಳಿ ಬೈದ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.
ಹೆಬ್ರಿ ಎಸ್.ಆರ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೃಪ್ತಿ (16) ಆತ್ಮಹತ್ಯೆ ಮಾಡಿಕೊಂಡವರು.
ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಯಾನೆ ಸೂರಿ ಮತ್ತು ಹೇಮ ದಂಪತಿ ಮಗಳಾದ ತೃಪ್ತಿ ಎಸ್.ಆರ್ ಶಿಕ್ಷಣ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ (ವಿಜ್ಞಾನ ವಿಭಾಗ) ವಿದ್ಯಾಭ್ಯಾಸಕ್ಕೆ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣ ಆಡಳಿತ ಮಂಡಳಿ ತೃಪ್ತಿಯನ್ನು ಬೈದಿದ್ದಾರೆ, ಮತ್ತು ಫೈನ್ ಹಾಗೂ ಸಂಪೂರ್ಣ ಫೀಸ್ ಕಟ್ಟಬೇಕೆಂದಿದ್ದಾರೆ ಎಂದು ಕಳೆದ ಮೂರು ದಿನಗಳ ಹಿಂದೆ ತೃಪ್ತಿ ತಂದೆಯ ಬಳಿ ಹೇಳಿಕೊಂಡಿದ್ದರು. ಆದರೆ ಇದರಿಂದಾಗಿ ಮಾನಸಿಕವಾಗಿ ನೊಂದ ತೃಪ್ತಿ ನಿನ್ನೆ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುರೇಶ್ ಮೆಂಡನ್ ಅವರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.