ರಂಗಾಯಣದ ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವಹೇಳನ – ಜ.10 ರಂದು ಪ್ರತಿಭಟನೆಗೆ ನಿರ್ಧಾರ

ಮೈಸೂರು ಜ.7 : ಇತ್ತೀಚೆಗೆ ರಂಗಾಯಣದಲ್ಲಿ ಪ್ರದರ್ಶನಗೊಂಡ `ಸಾಂಬಶಿವ ಪ್ರಹಸನ’ ನಾಟಕದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ ಜ.10ರಂದು ಬೃಹತ್ ಪ್ರತಿಭಟನೆ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

ಈ ಬಗ್ಗೆ ಪುರಭವನದಲ್ಲಿ ಸಭೆ ನಡೆಸಿ ಚರ್ಚೆ ನಡೆಸಲಾಗಿದ್ದು, ಈ ವೇಳೆ ಕಾಂಗ್ರೆಸ್ ಮುಖಂಡರು, ‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಡೆಯು ಕೋಮುಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್.ಎಸ್.ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಜ.10 ರಂದು ಬೆಳಿಗ್ಗೆ 10ಕ್ಕೆ ನಗರದ ಓವಲ್ ಮೈದಾನದಲ್ಲಿ ಸಮಾವೇಶಗೊಂಡು, ಖಂಡನಾ ಸಭೆ ನಡೆಸಿ ಬಳಿಕ ರಂಗಾಯಣಕ್ಕೆ ಮುತ್ತಿಗೆ ಹಾಕಲು ಸಭೆಯಲ್ಲಿ ನಿರ್ಧರಿಸಿಸಲಾಯಿತು ಹಾಗೂ ಪಕ್ಷಾತೀತವಾಗಿ ನಡೆಯುವ ಈ ಹೋರಾಟದಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚಿನ ಜನರನ್ನು ಸೇರಿಸಬೇಕು. ಪ್ರಗತಿಪರ ಚಿಂತಕರು, ಸಾಹಿತಿಗಳು ಮತ್ತು ವಿವಿಧ ಸಮಾಜಗಳ ಮುಖಂಡರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರ ಘಟಕದ ಅಧ್ಯಕ್ಷ ಆರ್. ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ, ಕುರುಬರ ಸಂಘ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಮುಖಂಡರಾದ ವಾಸು, ಹರೀಶ್ ಗೌಡ, ಎಂ.ಶಿವಣ್ಣ, ಮಂಜುಳಾ ಮಾಸನ, ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ಧ ಶೆಟ್ಟಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!