ಉಡುಪಿ: ನೇರಪಾವತಿ,ಖಾಯಮಾತಿಗೆ ಆಗ್ರಹ- ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರ

ಉಡುಪಿ ಫೆ.1 (ಉಡುಪಿ ಟೈಮ್ಸ್ ವರದಿ): ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಮೀಪ ರಾಜ್ಯ ಪಾಲಿಕೆ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯಿತಿ, ಹೊರ ಗುತ್ತಿಗೆ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟವಧಿ ಮುಷ್ಕರವನ್ನು ನಡೆಸಲಾಗುತ್ತಿದೆ.

ಈ ವೇಳೆ ಮುಷ್ಕರ ನಿರತರು ಸರಕಾರ ಎಸಗಿರುವ ಲೋಪವನ್ನು ಸರಿಪಡಿಸಿ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿದರು.

ಇದೇ ವೇಳೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು. ನೀರುಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್ ಗಳು, ಡಾಟ ಆಪರೇಟರುಗಳು ಸ್ಯಾನಿಟರಿ ಸೂಪರ್ ವೈಸರುಗಳು ಸೇರಿದಂತೆ 15ಸಾವಿರಕ್ಕು ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದೆ ಎಂದು ಆರೋಪಿಸಿದರು.

ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೌರಕಾರ್ಮಿಕರ ನೇರನೇಮಕಾತಿಯನ್ನು ಸ್ವಾಗತಿಸುತ್ತೇವೆ ಆದರೆ ಹೊರಗುತ್ತಿಗೆ ನೌಕರರ ನ್ಯಾಯಬದ್ದ ಹಕ್ಕಿಗಾಗಿ ಆಗ್ರಹಿಸುವುದು ನಮ್ಮ ಹಕ್ಕಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಯಾವುದೇ ಸರಕಾರಕ್ಕೆ ಶೋಭೆಯಲ್ಲ.ಸರಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರನ್ನು ವಿಭಜಿಸಿದೆ. ವಾಸ್ತವವಾಗಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಸಹ ನಗರಗಳ ಸ್ವಚ್ಛತೆಗೆ ಕುಡಿಯುವ ನೀರು ಪೂರೈಕೆಗೆ ಪರಸ್ಪರ ಪೂರಕವಾಗಿ ದುಡಿಯುವವರೆ ಆಗಿದ್ದಾರೆ. ಆದರೆ ಅಧಿಕಾರಿಗಳು ಈ ನೌಕರರನ್ನು ವಿಭಜಿಸಿ ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಮುಷ್ಕರದಲ್ಲಿ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು, ಲೋಡರ್ಸ್, ಕೀನರ್ಸ್, ಹೆಲ್ಪರ್ಸ್ ಒಳಚರಂಡಿ ಕಾರ್ಮಿಕರು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!