ಉಡುಪಿ: ಎಸ್.ಡಿ.ಎಂ ಆಯುರ್ವೇದ ಕಾಲೇಜು ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ
ಉಡುಪಿ ಫೆ.1 (ಉಡುಪಿ ಟೈಮ್ಸ್ ವರದಿ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಕುತ್ಪಾಡಿ ಇದರ ರೆಡ್ಕ್ರಾಸ್ ಘಟಕ ಹಾಗೂ ಎನ್ನೆಸ್ಸೆಸ್ ಘಟಕದ ವತಿಯಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕಗಳ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ ಅವರು ಮಾತನಾಡಿ, ರಕ್ತದಾನ ಮಾಡುವಲ್ಲಿ ಯುವ ಜನಾಂಗ ಭಾಗವಹಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ ಅವರು ಭಾಗವಹಿಸಿ, ಏಡ್ಸ್ ಮುಕ್ತ ಜಿಲ್ಲೆಯಾಗಿಸುವಲ್ಲಿ ಯುವಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಜಿಲ್ಲಾ ಆಸ್ಪತ್ರೆ ಉಡುಪಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು.
ಕಾಲೇಜು ಮಟ್ಟದಲ್ಲಿ ಏರ್ಪಡಿಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ಸಂಪತ್ ಶೆಟ್ಟಿ ಮತ್ತು ತಂಡ, ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ನಿಟ್ಟೆಯ ಎನ್ಎಸ್ಎಎಮ್ ಪ್ರಥಮ ದರ್ಜೆ ಕಾಲೇಜಿನ ಪ್ರಥಮ್ ಪೂಜಾರಿ ಮತ್ತು ತಂಡ ದ್ವಿತೀಯ ಸ್ಥಾನ ಹಾಗೂ ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸುಮೇದ್ ನಾವಡ ಮತ್ತು ತಂಡ ತೃತೀಯ ಸ್ಥಾನವನ್ನು ಪಡೆದಿದ್ದು, ಈ ಸಂದರ್ಭದಲ್ಲಿ ವಿಜೇತರಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವೀರಕುಮಾರ ಕೆ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಮಹಾಬಲೇಶ್ವರ, ಹಿರಿಯ ಆರೋಗ್ಯ ಪರಿವೀಕ್ಷಕರು ಸತೀಶ್ ರಾವ್, ರೆಡ್ಕ್ರಾಸ್ ಅಧಿಕಾರಿ ಡಾ. ಮೊಹಮ್ಮದ್ ಫೈಸಲ್, ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ವಿದ್ಯಾಲಕ್ಷ್ಮಿ ಕೆ, ಡಾ. ಯೋಗೀಶ ಆಚಾರ್ಯ, ಡಾ. ಅನಿರುದ್ಧ, ಸಮುದಾಯ ಸೇವಾ ಘಟಕದ ಡಾ. ಎಸ್. ಆರ್. ಮೊಹರೇರ್ ಕಾಲೇಜಿನ ಬೋಧಕ ವರ್ಗದ ಸ್ವಯಂಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.