ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದಿಂದ ಕಾರ್ಮಿಕ ಸಚಿವರ ಭೇಟಿ

ಉಡುಪಿ ಫೆ.2 (ಉಡುಪಿ ಟೈಮ್ಸ್ ವರದಿ) : ಸಾಂಪ್ರದಾಯಿಕವಾಗಿ ಚಿನ್ನ ಮತ್ತು ಬೆಳ್ಳಿಯ ಕೆಲಸ ಮಾಡುತ್ತಿರುವ ಅಸಂಘಟಿತ ವಲಯದಲ್ಲಿ ಬರುವ ಕಾರ್ಮಿಕರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಒದಗಿಸಲು ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ನಿಯೋಗ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಇಂದು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಕುಟುಂಬಗಳು ಸಾಂಪ್ರದಾಯಿಕವಾಗಿ ಚಿನ್ನ ಮತ್ತು ಬೆಳ್ಳಿಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಆದರೆ ಪ್ರಸ್ತುತ ಈ ಕ್ಷೇತ್ರ(ಚಿನ್ನ ಮತ್ತು ಬೆಳ್ಳಿ)ದಲ್ಲಿ ದೊಡ್ಡ ಪ್ರಮಾಣದ ಉದ್ಯಮಗಳು ಆರಂಭವಾಗಿರುವುದರಿಂದ ಸಾಂಪ್ರದಾಯಿಕವಾಗಿ ಈ ಕೆಲಸಗಳನ್ನು ಮಾಡುತ್ತಿದ್ದವರಿಗೆ ಕೆಲಸವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಕಾರ್ಮಿಕರಿಗೆ ಸರ್ಕಾರದಿಂದ ಒದಗಿಸಬೇಕಾಗದ ಸೌಲಭ್ಯಗಳ ಮನವಿಯನ್ನು ಕಾರ್ಮಿಕ ಸಚಿವರಿಗೆ ನೀಡಿ ಇದರ ಅವಶ್ಯಕತೆ ಬಗ್ಗೆ ಶಾಸಕ ರಘುಪತಿ ಭಟ್ ಅವರು ಸಚಿವರಿಗೆ ಮನವರಿಕೆ ಮಾಡಿದರು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವ ಶಿವರಾಮ ಹೆಬ್ಬಾರ್ ಅವರು, ಚಿನ್ನ ಮತ್ತು ಬೆಳ್ಳಿ ಕೆಲಸಗಾರರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ತಕ್ಷಣದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಿನ್ನಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ರವಿಚಂದ್ರ ಮಾರಳಿ, ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಕಲ್ಯಾಣಪುರ ಪಂಚಾಯತ್ ಸದಸ್ಯ ಪ್ರಶಾಂತ್ ಆಚಾರ್ಯ, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಹಾಗೂ ಸಂಘದ ಕಾರ್ಯದರ್ಶಿ ರಘುನಾಥ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!