ಸಿದ್ದರಾಮಯ್ಯ,ಯಶ್ ತನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು : ಡೆತ್ ನೋಟ್ ಬರೆದು ವ್ಯಕ್ತಿ ಆತ್ಮಹತ್ಯೆ

ಮಂಡ್ಯ: ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಡೆತ್ ನೋಟ್ ನಲ್ಲಿ ಆ ವ್ಯಕ್ತಿ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ, ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ಯಾರು ಎಂಬ ವಿಚಾರ ಇರುತ್ತದೆ. ಆದರೆ ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಡೆತ್ ನೋಟ್‍ನಲ್ಲಿ ತನ್ನ ಅಂತ್ಯ ಸಂಸ್ಕಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಬೇಕೆಂದು ಬರೆದುಕೊಂಡಿದ್ದಾರೆ. ಇದೀಗ ಯುವಕನೊಬ್ಬನ ಕೊನೇಯ ಆಸೆಯನ್ನೊಳಗೊಂಡ ಡೆತ್ ನೋಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದು ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ. ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪೆಟ್ರೋಲ್ ಬಂಕ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು. ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ ಯುವಕ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

 ಸಾಯುವ ಮುನ್ನ ರಾಮಕೃಷ್ಣ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತಾನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ  ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿದ್ದು, ತನ್ನ ಅಂತ್ಯಸಂಸ್ಕಾರದಲ್ಲಿ ಇವರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುವ ಮೂಲಕ ತನ್ನ ಕೊನೆಯ ಆಸೆಯನ್ನು ಹೇಳಿಕೊಂಡಿದ್ದಾನೆ.

ಇದೀಗ ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಅವರು ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!