ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ: ರಹೀಂ ಉಚ್ಚಿಲ್

ಉಡುಪಿ(ಉಡುಪಿ ಟೈಮ್ಸ್ ವರದಿ): ಬ್ಯಾರಿ ಸಮುದಾಯ ಏಳಿಗೆಯ ಉದ್ದೇಶದಿಂದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಎಲ್ಲರು ಒಗ್ಗಟ್ಟಿನಿಂದ ಮುನ್ನಡೆಯಬೇಕಾಗಿದೆ. ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಳಿ ತೆರಳಿ ಈ ಬೇಡಿಕೆಯನ್ನು ಸಲ್ಲಿಸಿ, ಪ್ರಾಧಿಕಾರ ಘೋಷಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್‌ನ್ನು ಬುಧವಾರ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ದಫ್ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಬ್ಯಾರಿ ಸಮುದಾಯದ ಹೋರಾಟದ ಫಲವಾಗಿ ನಮಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ದೊರೆತಿದೆ. ಬ್ಯಾರಿ ಭಾಷೆಯ ಸಂಘಟನೆಯ ಹೆಸರಿನಲ್ಲಿ ನಾವೆಲ್ಲ ಒಂದಾಗಬೇಕು. ಬ್ಯಾರಿ ಸಂಘಟನೆಗಳು ಧರ್ಮದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಲು ಧರ್ಮಗುರುಗಳ ಮಾರ್ಗದರ್ಶನ ಅಗತ್ಯವಾಗಿ ಬೇಕಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಪರಿಷತ್ ಅಧ್ಯಕ್ಷ ಹಾಜಿ ಎಸ್.ಪಿ.ಉಮರ್ ಫಾರೂಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ನಝೀರ್ ಪೊಲ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಯಾಕೂಬ್ ಖಾದರ್ ಗುಲ್ವಾಡಿ, ಸಾಹಿತಿ ಟಿ.ಎಸ್.ಹುಸೈನ್ ಕಾಪು, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು, ಕರ್ನಾಟಕ ಮುಸ್ಲಿಮ್ ಜಮಾಅತ್ ಜಿಲ್ಲಾಧ್ಯಕ್ಷ ರಫೀಕ್ ಬಿಎಸ್‌ಎಫ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್, ಬೈಂದೂರು ತಾಲೂಕು ಜಂ ಇಯ್ಯತುಲ್ ಫಲಾಹ್ ಅಧ್ಯಕ್ಷ ಮನ್ಸೂರ್ ಮರವಂತೆ ಭಾಗವಹಿಸಿದ್ದರು.

ಮುಹಮ್ಮದ್ ಶರೀಫ್ ನೀರ್ಮುಂಜೆ ಧ್ಯೇಯಗೀತೆ ಹಾಡಿದರು. ಪರಿಷತ್ ಹಿರಿಯ ಉಪಾಧ್ಯಕ್ಷ ಅಬ್ದುಲ್ ರೆಹ್ಮಾನ್ ಮಣಿಪಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಬ್ಯಾರಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್ ಆತ್ರಾಡಿ ವಂದಿಸಿ ದರು. ಕೋಶಾಧಿಕಾರಿ ಖಾಸಿಂ ಬಾರಕೂರು ಉಪಸ್ಥಿತರಿದ್ದರು. ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಮತ್ತು ದಫ್ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

error: Content is protected !!